• Fri. May 3rd, 2024

ಕೋಲಾರ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಜ.೨೬ ಗುದ್ದಲಿ ಪೂಜೆ

PLACE YOUR AD HERE AT LOWEST PRICE

ಕೋಲಾರ ಜಿಲ್ಲಾ ಕ್ರೀಡಾಪಟುಗಳ, ಕ್ರೀಡಾ ಪ್ರೇಮಿಗಳ, ಸಾರ್ವಜನಿಕರ ಕನಸು ನನಸಾಗುತ್ತಿದ್ದು ಜ.26 ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಎಂದು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಅಧ್ಯಕ್ಷ ಎಚ್.ಜಗನ್ನಾಥ್ ಕೋರಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜ.26 ರಂದು ಗಣರಾಜ್ಯೋತ್ಸವ ಅಂಗವಾಗಿ ಗುರುವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸಂಸದ ಎಸ್.ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಿಂಥೆಟಿಕ್ ಅಥ್ಲೆಟಿಕ್ಸ್ ಟ್ರ್ಯಾಕ್ ಜೊತೆಗೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ನೈಸರ್ಗಿಕ ಹುಲ್ಲು ಹಾಸಿನ ಕಾಲ್ಚೆಂಡಿನ ಅಂಕಣ, ಸಂಪ್ ಟ್ಯಾಂಕ್, ಹತ್ತು ಟ್ರ್ಯಾಕುಗಳು ಇನ್ನಿತರ ಕ್ರೀಡಾ ಚಟುವಟಿಕೆಯ ಅಭಿವೃದ್ಧಿ ಕಾಮಗಾರಿಯನ್ನು ಹಂತ ಹಂತವಾಗಿ ನಡೆಸಲಾಗುವುದು ಎಂದು ವಿವರಿಸಿದರು.

ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಕಾರ್ಯದರ್ಶಿ ಕೆ.ಜಯದೇವ ಮಾತನಾಡಿ, ಜಿಲ್ಲೆಯ ಜನರ ಸುಮಾರು 10 ವರ್ಷಗಳ ಕನಸು ನನಸಾಗಲು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಪ್ರಯತ್ನವು ಯಶಸ್ವಿಯಾಗಿದ್ದು, 7ಕೋಟಿ ಅನುದಾನದಲ್ಲಿ ಉತ್ತಮ ದರ್ಜೆಯ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಗುತ್ತಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ ಎಂದು ತಿಳಿಸಿದರು.

ಮಧ್ಯಪ್ರದೇಶದ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ಅದನ್ನು ಮೀರಿಸುವ ರೀತಿಯಲ್ಲಿ ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನೀಲಿ ಬಣ್ಣದ ಟ್ರಾಕ್ ಅನ್ನು ನಿರ್ಮಿಸಲು ಉದ್ದೇಶಿಸಿದ್ದು. ಇನ್ನೂ ಸಂಪೂರ್ಣವಾಗಿ ಮಾಡಬೇಕಾಗಿರುವ ಕಾಮಗಾರಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಮಾಜಿ ಸಚಿವ ದಿವಂಗತ ಬೈರೇಗೌಡ ಅವರು ಅಮೆಚರ್ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಅಧ್ಯಕ್ಷರಾಗಿದ್ದ ಹಾದಿಯಿಂದಲೂ ಜಿಲ್ಲೆ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದರು. ಅದೇ ಮಾರ್ಗದಲ್ಲಿ ಕ್ರೀಡಾಂಗಣದ ರೂಪರೇಷೆಗಳು ಮತ್ತು ಸಾಮಾಜಿಕ ನ್ಯಾಯದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರು ಕ್ರೀಡಾಪಟುಗಳಿಗಾಗಿ ಕೋಲಾರದ ವಿಶ್ವೇಶರಯ್ಯ ಕ್ರೀಡಾಂಗಣ ಹಾಗೂ ಕೆಜಿಎಫ್ ತಾಲೂಕಿನ ಕ್ರೀಡಾಂಗಣ ರೂಪಿಸುವಲ್ಲಿ ಎಲ್ಲಾ ರೀತಿಯ ಸಹಕಾರ, ಬೆಂಬಲ, ಸಹಾಯ ಮಾಡಿದ್ದಾರೆ. ಕೆ.ಎಚ್.ಮುನಿಯಪ್ಪ ಅವರು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬಂದಂತಹ ಜಿಲ್ಲೆಯ ಕ್ರೀಡಾಪಟುಗಳಿಗೆ ದೆಹಲಿಯಲ್ಲಿ ಆಶ್ರಯ ನೀಡಿ ಉತ್ತಮ ಪ್ರದರ್ಶನ ನೀಡಲು, ವಿಜೇತರಾಗಲು ಎಲ್ಲಾ ರೀತಿಯ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾಡಳಿತ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ದೊಂದಿಗೆ ಕೈಜೋಡಿಸಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಪೂರ್ಣ ಸಹಕರಿಸಿದ್ದು ಅವರ ಕಾರ್ಯವೈಖರಿಯಿಂದ ಬಹುಬೇಗ ಅನುದಾನ ಬಿಡುಗಡೆಯಾಗಿ, ಗುತ್ತಿಗೆ ನೀಡಲು ಅನುಕೂಲವಾಗಿದೆ ಎಂದು ತಿಳಿಸಿದರು.

ಸುಮಾರು 8 ವರ್ಷಗಳಿಂದಲೂ ಅಂತರ್ ಜಿಲ್ಲಾ ಕ್ರೀಡಾಕೂಟವನ್ನು ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆಸಲು ಸಹಕರಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಧನ್ಯವಾದ ತಿಳಿಸಿದ ಅವರು, ಕ್ರೀಡಾಪಟುಗಳು ಸಿಂಥೆಟಿಕ್ ಟ್ರ್ಯಾಕ್ ನ ಪ್ರಯೋಜನವನ್ನು ಪಡೆದುಕೊಂಡು ಕೋಲಾರ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಉಪಾಧ್ಯಕ್ಷ ಗೌಸ್ ಖಾನ್, ಖಜಾಂಚಿ ಎಸ್.ಆರ್.ಪುರುಷೋತ್ತಮ್, ಜಂಟಿ ಕಾರ್ಯದರ್ಶಿ ರಾಜೇಶ್, ನಿರ್ದೇಶಕರಾದ ರಾಮು, ಕಾಶೀರಾಜನ್ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!