PLACE YOUR AD HERE AT LOWEST PRICE
ದೇಶದಲ್ಲಿ ರೈತರ ಅಭಿವೃದ್ಧಿಗಾಗಿ ಡಾ.ಎಂ.ಎಸ್ ಸ್ವಾಮಿನಾಥನ್ ಆಯೋಗದ ವರದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಸರಕಾರವನ್ನು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕೇಂದ್ರ ಸರಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನು ಅಂಗೀಕರಿಸಬೇಕು. ಎಂಎಸ್ಪಿ ಕುರಿತಂತೆ ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಮತ್ತು ಅದರ ಹೇಳಿಕೆಯ ಕಾರ್ಯಸೂಚಿಯು ರೈತರ ಆಗ್ರಹಗಳಿಗೆ ವಿರುದ್ಧವಾಗಿದೆ ಅದ್ದರಿಂದ ಈ ಸಮಿತಿಯನ್ನು ವಜಾಗೊಳಿಸಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರತಿನಿಧಿಗಳನ್ನು ಸೇರಿಸುವ ಮೂಲಕ ರೈತರಿಗೆ ಆಗ್ರಹಗಳಿಗೆ ಸರಿ ಹೊಂದುವ ಹೊಸ ಸಮಿತಿಯನ್ನು ರಚನೆ ಮಾಡಬೇಕು ಕೃಷಿಯಲ್ಲಿ ಹೆಚ್ಚುತ್ತಿರುವ ವೆಚ್ಚಗಳು ಮತ್ತು ಬೆಳೆಗಳಿಗೆ ಲಾಭದಾಯಕ ಬೆಲೆಗಳು ಸಿಗದ ಕಾರಣ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಅನಾವೃಷ್ಟಿ, ಅತಿವೃಷ್ಟಿ, ಬೆಳೆ ರೋಗಗಳು ಇತ್ಯಾದಿಗಳಿಂದಾದ ನಷ್ಟವನ್ನು ಸರಕಾರವೇ ಸರಿದೂಗಿಸಬೇಕು ಮಾಧ್ಯಮ, ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಕೃಷಿ ಕಾರ್ಮಿಕರಿಗೆ ಮಾಸಿಕ ಐದು ಸಾವಿರ ರೈತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಮತ್ತು ಇತರ ರಾಜ್ಯಗಳಲ್ಲಿ ರೈತರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ರೈತ ಚಳವಳಿಯಲ್ಲಿ ಹುತಾತ್ಮರಾದ ಎಲ್ಲಾ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಹುತಾತ್ಮರ ಕುಟುಂಬದ ಪುನರುಜ್ಜೀವನಕ್ಕೆ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸಿಂಘು ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೆ ಪಿ ಆರ್ ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ್, ಪ್ರಧಾನ ಕಾರ್ಯದರ್ಶಿ ಪಾಪಕೋಟ ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ವೆಂಕಟಪ್ಪ ವಿ.ನಾರಾಯಣರೆಡ್ಡಿ ಶಾಂತಮ್ಮ, ಮಂಜಳ ರಾಜ್ಯ ರೈತ ಸಂಘ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಪ್ರಧಾನ ಕಾರ್ಯದರ್ಶಿ ಕೆ ಆನಂದ್ ಕುಮಾರ್, ತಾಲ್ಲೂಕು ಅಧ್ಯಕ್ಷ ಚಿನ್ನಾಪುರ ಮಂಜುನಾಥ, ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣದ ಕೂಟೇರಿ ನಾಗರಾಜ್, ಕಾರ್ಮಿಕ ಸಂಘಟನೆಯ ಮುಖಂಡರಾದ ವಿಜಯಕೃಷ್ಣ, ಭೀಮರಾಜ್, ಕೇಶವರಾವ್, ಡಿಎಸ್ಎಸ್ ಸಂಘಟನೆಯ ಹಾರೋಹಳ್ಳಿ ರವಿ, ಜೆಎಂಎಸ್ ಆಂಜನಮ್ಮ ಇದ್ದರು