PLACE YOUR AD HERE AT LOWEST PRICE
ಬಂಗಾರಪೇಟೆ:ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾದ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಗೈರುಹಾಜರಾಗುವ ಮೂಲಕ ಅಧಿಕಾರಿಗಳು ತಮ್ಮ ಬೇಜವಾಬ್ದಾರಿ ವರ್ತನೆಯನ್ನು ತೋರಿದ್ದಾರೆ, ಇವರ ವಿರುದ್ಧ ನೋಟಿಸ್ ಜಾರಿ ಮಾಡಲಾಗುವುದು ಹಾಗೂ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು, ಎಂದು ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಂ.ರವಿ ತಿಳಿಸಿದರು.
ಬಂಗಾರಪೇಟೆ ತಾಲ್ಲೂಕು ಚಿಕ್ಕ ಅಂಕಂಡಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ತ್ರೈ ಮಾಸಿಕ ಕೆ.ಡಿ.ಪಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಆದೇಶದಂತೆ 27 ಇಲಾಖೆಯ ಅಧಿಕಾರಿಗಳು ಕೆಡಿಪಿ ಸಭೆಗೆ ಹಾಜರಾಗಬೇಕಾಗಿತ್ತು, ಕಳೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಆಗಮಿಸದ ಹಿನ್ನೆಲೆಯಲ್ಲಿ ಸಮಸ್ಯೆಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸಲು ಸಾಧ್ಯವಾಗಿರಲಿಲ್ಲ.
ಆದ ಕಾರಣ ಈ ಬಾರಿ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಭೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು, ಆದರೆ ಅಧಿಕಾರಿಗಳು ೀ ಬಾರಿಯೂ ಸಭೆಗೆ ಬಾರದೆ ನಿರ್ಲಕ್ಷ ಧೋರಣೆಯನ್ನು ಅನುಸರಿಸಿದ್ದು ನೋಟಿಸ್ ಗೆ ಕಿಮ್ಮತ್ತು ನೀಡದೆ ಗೈರು ಹಾಜರಾಗಿದ್ದಾರೆ. ಇವರ ದುರವರ್ತನೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರ ತೆರಿಗೆಯ ಹಣದಿಂದ ವೇತನ ಪಡೆಯುತ್ತಿರುವ ಅಧಿಕಾರಿಗಳು ಸಭಗೆ ಬಂದು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿತ್ತು, ಆದರೆ ಅಧಿಕಾರಿಗಳು ನಿರ್ಲಕ್ಷತನ ತೋರುತ್ತಿರುವುದು ಸಮಂಜಸವಲ್ಲ. ಅರಣ್ಯ ಇಲಾಖೆ, ತೋಟಗಾರಿ ಇಲಾಖೆ, ಗ್ರಾಮೀಣ ಬ್ಯಾಂಕ್, ಪಶು ವೈದ್ಯ ಇಲಾಖೆ ಅಧಿಕಾರಿಗಳನ್ನು ಹೊರತುಪಡಿಸಿ ಯಾವೊಬ್ಬ ಇಲಾಖೆಯ ಅಧಿಕಾರಿಗಳು ಸಭೆಗೆ ಬರಲಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು.
ಬೇಸಿಗೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ಎಚ್ಚರ ವಹಿಸುವುದು, ಕೆಲವು ಗ್ರಾಮಗಳಲ್ಲಿ ಅಂಗಡಿ ಮಳಿಗೆಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟವಾಗುತ್ತಿರುವುದು. ದುರಸ್ತಿ ಆಗಬೇಕಾಗಿರುವ ಸರ್ಕಾರಿ ಕಟ್ಟಡಗಳು, ಆರೋಗ್ಯ ಸಮಸ್ಯೆಗಳು, ಪಿಂಚಣಿ ವಿಷಯಗಳು.
ಮೂಲಭೂತ ಸೌಲಭ್ಯಗಳಾದ ಒಳಚರಂಡಿ, ಸಿಸಿ ರಸ್ತೆ, ಕುಡಿಯುವ ನೀರಿನ ಸೌಲಭ್ಯ, ದುರಸ್ತಿ ಕಾರ್ಯಗಳ ಬಗ್ಗೆ ಚರ್ಚಿಸಬೇಕಾಗಿತ್ತು, ಆದರೆ ಅಧಿಕಾರಿಗಳಿಗೆ ಜನರ ಬಗ್ಗೆ ಕಾಳಜಿ ಇಲ್ಲದಿರುವುದು ಕಂಡು ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ಪಿಡಿಓ ಚಿತ್ರಾ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯಾದ್ ನಯಾಜ್, ಪಶು ವೈದ್ಯಾಧಿಕಾರಿ ಪ್ರಿಯಾಂಕ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋಮು, ಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ಕೋದಂಡರಾಮರೆಡ್ಡಿ, ತೋಟಗಾರಿಕೆ ಇಲಾಖೆ ಸೌಮ್ಯ, ಗ್ರಂಥಾಲಯ ಅಧಿಕಾರಿ ಅರುಣ್ ಸಭೆಯಲ್ಲಿ ಉಪಸ್ಥಿತರಿದ್ದರು.