PLACE YOUR AD HERE AT LOWEST PRICE
ಭಾರತದ ಉಪಪ್ರಧಾನಿಯಾಗಿ ಹಸಿರು ಕ್ರಾಂತಿಯ ಮೂಲಕ ದೇಶದ ಹಸಿವು ನೀಗಿಸಿದ ಮಹಾನ್ ಚೇತನ ಬಾಬು ಜಗಜೀವನರಾಂ ಅವರಾಗಿದ್ದು, ಅವರ ಆದರ್ಶಗಳನ್ನು ಪಾಲಿಸುವ ಮೂಲಕ ತಾಲ್ಲೂಕಿನ ಅಭಿವೃದ್ದಿಗೆ ಶ್ರಮಿಸೋಣ ಎಂದು ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಮುನಿಯಪ್ಪ ತಿಳಿಸಿದರು.
ಕೋಲಾರ ನಗರದ ತಾಪಂ ಆವರಣದಲ್ಲಿ ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ಪ್ರತಿಯೊಬ್ಬರು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬ ಸಂದೇಶ ಸಾರಿದರು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.
ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಎನ್.ಶ್ರೀನಿವಾಸರೆಡ್ಡಿ ಮಾತನಾಡಿ, ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ತಾಪಂ ಸಹಾಯಕ ನಿರ್ದೇಶಕರಾದ ಅಶೋಕ್ಕುಮಾರ್,ಸುನೀತಾ, ತಾಲ್ಲೂಕು ಯೋಜನಾಧಿಕಾರಿ ರಮೇಶ್ ಪಿಡಿಒಗಳಾದ ಇಂದ್ರಮ್ಮ, ವತ್ಸಲಾ, ಸಿಬ್ಬಂದಿಗಳಾದ ಕರಿಬಸಪ್ಪ,ದಿನೇಶ್, ಪ್ರತ್ಯುಷಾ, ಶೈಲಜಾ, ಸೇರಿದಂತೆ ಇತರೆ ಸಿಬ್ಬಂದಿ ಹಾಜರಿದ್ದರು.