PLACE YOUR AD HERE AT LOWEST PRICE
ಕೋಲಾರ: ದೇಶದಲ್ಲಿ ಕ್ರೀಡಾ ಇಲಾಖೆಯಲ್ಲಿನ ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ,ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಪ್ರಮುಖ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಗುರುವಾರ ಸಿಪಿಐಎಂ ಪಕ್ಷದ ಸಾಮೂಹಿಕ ಸಂಘಟನೆಗಳ ನೇತೃತ್ವದಲ್ಲಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು 2023 ಏಪ್ರಿಲ್ 24 ರಿಂದ ನವದೆಹಲಿಯ ಜಂತರ್ ಮಂಥರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ ಇದುವರೆಗೂ ಎಫ್ಐಆರ್ ದಾಖಲಾಗಿರಲಿಲ್ಲ ಸುಪ್ರೀಂ ಕೋರ್ಟ್ ನ ಮಧ್ಯಪ್ರವೇಶದ ನಂತರವಷ್ಟೇ ಎಫ್ಐಆರ್ ದಾಖಲಾಗಿದೆ ಕುಸ್ತಿಪಟುಗಳ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ ಮೋದಿ ನೇತೃತ್ವದ ಸರ್ಕಾರ ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ದೂರಿನ ಆಧಾರದಲ್ಲಿ ಕಾನೂನು ಕ್ರಮಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಇದು ದೇಶದ ಕ್ರೀಡಾಪಟುಗಳಿಗೆ ಸರಕಾರ ಮಾಡಿರುವ ಘೋರವಾದ ಅಪರಾಧ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕೆಪಿಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆಯೇ ಸರಕಾರ ದೌರ್ಜನ್ಯ ನಡೆಸಿದ್ದಾರೆ. ಇಷ್ಟೆಲ್ಲಾ ಕಿರುಕುಳಗಳ ಮಧ್ಯೆಯೂ ನ್ಯಾಯ ಸಿಗುವತನಕ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟಿಸುತ್ತಿರುವುದು ಅತ್ಯಂತ ಪ್ರಶಂಸನೀಯ ಹಾಗೂ ಅಭಿನಂದನಾರ್ಹವಾಗಿದೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲಾ ನಾಗರೀಕರು ಈ ಪ್ರತಿಭಟನೆಯನ್ನು ಬೆಂಬಲಿಸಬೇಕು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳವಾಗಿದೆ ದೇಶಕ್ಕೆ ಕೀರ್ತಿ ತರುವ ಸಾಮಾರ್ಥ್ಯ ದ ಕ್ರೀಡಾಪಟುಗಳ ಆತ್ಮ ಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಈ ಪ್ರತಿಭಟನೆಯ ನೇತೃತ್ವವನ್ನು ವಿವಿಧ ಸಂಘಟನೆಗಳ ಮುಖಂಡರಾದ ಎಂ.ವಿಜಯಕೃಷ್ಣ, ಭೀಮರಾಜ್, ಎನ್.ಎನ್ ಶ್ರೀರಾಮ್, ವಿ ನಾರಾಯಣರೆಡ್ಡಿ, ಕೆ.ವಿ ಮಂಜುನಾಥ್, ಮುನಿರತ್ನಮ್ಮ, ಚಿನ್ನಮ್ಮ ನಾರಾಯಣಪ್ಪ, ಉಮೇಶ್, ಯಲ್ಲಪ್ಪ, ರಾಮಾಂಜಿ, ಮುಂತಾದವರು ವಹಿಸಿದ್ದರು