PLACE YOUR AD HERE AT LOWEST PRICE
:ಕಟೀಲ್.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಅನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಹತ್ತಾರು ಅಮಾಯಕರ ಸಾವಿನ ಪ್ರಕರಣಗಳೇ ಸಾಕ್ಷಿ” ಎಂದು ಆರೋಪಿಸಿದರು.
ಜೈನ ಮುನಿ, ಉದ್ಯಮಿ, ಸಂಘಟನೆಯ ಕಾರ್ಯಕರ್ತ, ಕಾರ್ಮಿಕ ಹೀಗೆ ಸಾಲು ಸಾಲು ಹತ್ಯೆ ನಡೆಯುತ್ತಿದೆ. ರಾಜ್ಯದಲ್ಲಿ ಸರಣಿ ಹತ್ಯೆಗಳು ನಡೆಯುತ್ತಿದ್ದರೂ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಈ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ನಾಯಕರೇ ತೀರ್ಮಾನಿಸಲಿದ್ದಾರೆ: ಕಳೆದ ಬಾರಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರ ವಿಚಾರದ ಕುರಿತು ರಾಷ್ಟ್ರೀಯ ನಾಯಕರ ಜತೆ ಚರ್ಚೆಗಳಾಗಿವೆ. ಚರ್ಚೆಯ ತೀರ್ಮಾನಗಳನ್ನು ರಾಷ್ಟ್ರೀಯ ನಾಯಕರೇ ನೀಡಲಿದ್ದಾರೆ. ಬಿಜೆಪಿ ಯಾವುದೇ ವೈಯಕ್ತಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಬಯಸುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇರಲಿಲ್ಲ, ಎಲ್ಲ ನಾಯಕರು ಒಟ್ಟಾಗಿಯೇ ಕೆಲಸ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸಿದ ಕಾರಣದಿಂದ ಫಲಿತಾಂಶದಲ್ಲಿ ವ್ಯತ್ಯಾಸಗಳಾಗಿವೆ. ಅವರು ಬಿಜೆಪಿಯ ಹೆಸರಿನಲ್ಲಿ ಸ್ಪರ್ಧಿಸಲಿಲ್ಲ. ಪಕ್ಷದಲ್ಲಿ ಯಾರು ಇರಬೇಕು, ಯಾರು ಬರಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಿ ಪಕ್ಷದ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸಲಾಗುವುದು ಎಂದರು.
(ನಮ್ಮಸುದ್ದಿ.ನೆಟ್) nammasuddi.net
ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.