PLACE YOUR AD HERE AT LOWEST PRICE
ಬಂಗಾರಪೇಟೆ:ಪರಿಸರ ಮತ್ತು ಜೀವ ಸಂಕುಲ ಒಂದಕ್ಕೊಂದು ಅವಿನಾಭಾವ ಸಂಬಂಧ ಹೊಂದಿದೆ, ಇತ್ತೀಚಿನ ದಿನಗಳಲ್ಲಿ ಮಾನವ ಸಮುದಾಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುವುದರ ಮೂಲಕ ತನಗರಿವಿಲ್ಲದಂತೆ ತನ್ನ ವಿನಾಶಕ್ಕೆ ತಾನೆ ಕಾರಣಕರ್ತನಾಗುತ್ತಿರುವುದು ವಿಷಾದನೀಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹೇಳಿದರು.
ತಾಲ್ಲೂಕಿನ ಕೆಸರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕೋಟಿ ವೃಕ್ಷರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವನಮಹೋತ್ಸವ ಕಾರ್ಯಕ್ರಮವು ಅತ್ಯಂತ ಪ್ರಮುಖವಾದುದ್ದು. ಈ ಕಾರ್ಯಕ್ರಮವು ಒಂದು ದಿನದ ಕಾರ್ಯಕ್ರಮವಾಗಬಾರದು ನಿರಂತರ ನಡೆಯಬೇಕು, ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮಾಡುವುದು ಅನಿವಾರ್ಯ. ಸರ್ಕಾರ ಈ ನಿಟ್ಟಿನಲ್ಲಿ ವೃಕ್ಷಗಳನ್ನು ಬೆಳೆಸುವ ಗುರಿಯನ್ನು ಹೊಂದಿದ್ದು, ಅದಕ್ಕೆ ಪೂರಕ ಎಂಬಂತೆ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಂತರ ಚಿನ್ನಕೋಟೆ ಮತ್ತು ಕೆಸರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಗೃಹಲಕ್ಷ್ಮಿ ಯೋಜನೆ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಬೇಕು. ಆರ್ಥಿಕ ಸಮಸ್ಯೆಗಳಿಂದ ಮುಕ್ತವಾಗಬೇಕು ಎಂಬ ಉದ್ದೇಶವನ್ನು ಹೊಂದಿದ್ದು ಮಹಿಳೆಯರು ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಂಗನವಾಡಿ ಕೇಂದ್ರಗಳು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲಿ ಇಡೀ ಸಮುದಾಯವನ್ನು ಪ್ರಗತಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತರ ಕೊಡುಗೆ ಶ್ಲಾಘನೀಯ ಎಂದರು.
ರಾಜ ಕಾಲುವೆ ಕಾಮಗಾರಿಯು ಅತಿ ವೇಗದಲ್ಲಿ ನಡೆಯುತ್ತಿದ್ದು ಇದರಿಂದ ಗ್ರಾಮಸ್ಥರಿಗೆ ಸಹಕಾರಿಯಾಗಲಿದೆ. ಮತ್ತು ಇಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ ನಾರಾಯಣಪ್ಪ ಸರ್ಕಾರದ ಸಮಗ್ರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಪ್ರಶಂಶಿಸಿದರು.