• Sun. May 5th, 2024

PLACE YOUR AD HERE AT LOWEST PRICE

ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

“ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂಬುದು ನನ್ನ ಭಾವನೆ. ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ” ಎಂದರು.

“ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ” ಎಂದು ಹೇಳಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದು ಅಂಬೇಡ್ಕರ್‌ ಹೇಳಿಕೆ ನೆನಪಿಸಿಕೊಂಡರು.

“ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾಗಿದೆ. ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ.

ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು” ಎಂದು ವಿನಂತಿಸಿಕೊಂಡರು.

ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತ ಮತ್ತು ‘ಈ ದಿನ‌’ ಮಾಧ್ಯಮದ ಸಲಹಾ ಸಂಪಾದಕ ಡಿ.ಉಮಾಪತಿ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಪತ್ರಕರ್ತ, ಕನ್ನಡಪ್ರಭ ಸಂಪಾದಕ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿ ಪದಾಧಿಕಾರಿಗಳು ಕಾರ್ಯಕ್ರಮ ನಡೆಸಿಕೊಟ್ಟರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!