PLACE YOUR AD HERE AT LOWEST PRICE
ಬಂಗಾರಪೇಟೆ:ಕ್ರೀಡಾಕೂಟಗಳಲ್ಲಿ ಸೋಲು ಗೆಲವು ಅನ್ನುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಗೆಲ್ಲವುದೇ ಮುಖ್ಯವಲ್ಲ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಪ್ಪಯ್ಯ ಗೌಡ ಹೇಳಿದರು.
ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಗೆಲುವಿನ ಲೆಕ್ಕಾಚ್ಚಾರದಲ್ಲಿ ಯಾರು ಸಹ ಎದೆಗುಂದದೆ ಮುಂಬರುವ ಕ್ರೀಡೆಗಳ ಕಡೆ ಗಮನ ಹರಿಸಿ ನಿಮ್ಮ ಶಾಲೆ, ಹೋಬಳಿ, ತಾಲ್ಲೂಕು ಮತ್ತು ಜಿಲ್ಲೆಗೆ ಹೆಸರು ತರಬೇಕೆಂದು ಕಿವಿಮಾತು ಹೇಳಿದರು.
ಹುಲಿಬೆಲೆ ಶಾಲೆಯ ಮುಖ್ಯಶಿಕ್ಷಕ ಸಂಜೀವಪ್ಪ ಮಾತನಾಡುತ್ತಾ, ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಓದಿನೊಂದಿಗೆ ಕ್ರೀಡೆಗಳಲ್ಲಿ ಆಸಕ್ತಿ ರೂಢಿಸಿಕೊಳ್ಳಬೇಕು. ಕ್ರೀಡೆ ಮನಸ್ಸಿಗೆ ಮುದ ನೀಡುವುದಲ್ಲದೆ ದೇಹಕ್ಕೆ ಚೈತನ್ಯ ತುಂಬಲಿದೆ ಎಂದರು.
ಮಕ್ಕಳಲ್ಲಿನ ಪ್ರತಿಭೆ ಹೊರತೆಗೆಯಲು ಕ್ರೀಡೆ ಸೂಕ್ತ ವೇದಿಕೆ. ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಶಿಕ್ಷಕರು ಹೆಚ್ಚಿನ ಕಾಳಜಿವಹಿಸಬೇಕು. ಕ್ರೀಡೆಗಳಲ್ಲೂ ಹಲವಾರು ಪ್ರತಿಭೆಗಳಿದ್ದು, ಅಂತಹ ಪ್ರತಿಭೆ ಹೊರಬರಲು ಶಿಕ್ಷಣ ಇಲಾಖೆ ಕ್ರೀಡಾಕೂಟವೆಂಬ ಉತ್ತಮ ವೇದಿಕೆ ನೀಡಿದೆ. ಇದನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ಎಂದು ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ ರವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಆಂಜನೇಯಗೌಡ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆಂಜನೇಯ ಗೌಡ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಎಸ್ಸಿ.ಎಸ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರಮಂಗಲ ಕ್ಲಸ್ಟರ್ ಸಿ ಆರ್ ಪಿ ವಿಜಯ್ ಕುಮಾರ್, ಶಿಕ್ಷಕರಾದ ನಿರ್ಮಲ,ತಾಯಪ್ಪ, ವೆಂಕಟೇಶ್,ಮಮತಾ, ವಾಜಿದ್, ಗಣೇಶ್ ಮೊದಲಾದವರು ಇದ್ದರು.