PLACE YOUR AD HERE AT LOWEST PRICE
ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ – ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಾಡಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಿಮುಖನಾಗದೆ ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶಕ್ಕೆ ದೊರೆತಿರುವ ಈ ಆರಂಭಿಕ ಯಶಸ್ಸು ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ವರ್ಷಕ್ಕೊಮ್ಮೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆ ನಡೆಸಲಾಗುತ್ತಿತ್ತು. ಇದು ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡವನ್ನು ಹೆಚ್ಚಿಸಿ, ಅವರ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತಿತ್ತು ಜೊತೆಗೆ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮತ್ತೊಂದು ವರ್ಷ ಕಾಯಲಾಗದೆ ಶಿಕ್ಷಣ ಮೊಟಕುಗೊಳಿಸುತ್ತಿದ್ದ ಉದಾಹರಣೆಗಳು ಸಾಕಷ್ಟಿದ್ದವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ನಮ್ಮ ಸರ್ಕಾರವು ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ವಿನೂತನ ಪದ್ಧತಿ ಜಾರಿ ಮಾಡಿದೆ” ಎಂದಿದ್ದಾರೆ.
ಏನಿದು ಹೊಸ ನಿಯಮ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಹೊಸ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲಾಗಿದೆ.
ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ದತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿತ್ತು. ಇದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿತ್ತು.
ಸರ್ಕಾರದ ಹೊಸ ನಿಯಮದ ಪ್ರಕಾರ ‘ಪೂರಕಪರೀಕ್ಷೆ’ ಎಂಬ ಹೆಸರಿನ ಬದಲಿಗೆ ‘ವಾರ್ಷಿಕ ಪರೀಕ್ಷೆ 1, 2, ಮತ್ತು 3’ ಎಂದು ಹೆಸರಿಸುವುದರೊಂದಿಗೆ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರೆ
ಕಾರ್ಯಕ್ಷಮತೆಯನ್ನು ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಲು ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ. 1 , 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಲಾಗಿದೆ. ಇದು ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗಿದೆ.