PLACE YOUR AD HERE AT LOWEST PRICE
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲುಆರ್ಸಿ) ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ರಾಜ್ಯಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆತಂಕ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾವೇರಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯ ದುರಂತ. ಸರ್ಕಾರ ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡಿದೆಯೋ ಗೊತ್ತಿಲ್ಲ” ಎಂದರು.
“ರಾಜ್ಯ ಸರ್ಕಾರ ಎಲ್ಲೋ ಒಂದು ಕಡೆ ಎಡವಿದೆ. ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದರೆ ಖಂಡಿಸಿದ್ದೆ. ಧರಣಿ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೆ. ಇವತ್ತು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ” ಎಂದು ತಿಳಿಸಿದರು.
“ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಆ ಅಧಿಕಾರಿಗಳ ತಂಡ ಸಲ್ಲಿಸಲಿ. ಆಗ ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ರಾಜ್ಯದ ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟು ಇದೆ. ನಮ್ಮಲ್ಲಿ ಒಗ್ಗಟ್ಟು ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.