PLACE YOUR AD HERE AT LOWEST PRICE
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವ ಆಸೆಯನ್ನು ಕೆಹೆಚ್ ಮುನಿಯಪ್ಪ ವ್ಯಕ್ತಪಡಿಸಿದ್ದು, ತಾನು ಕೂಡ ಟಿಕೆಟ್ ಆಕಾಂಕ್ಷಿ ಎನ್ನುವ ಸಂದೇಶ ರವಾನಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ, ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾಗ, ನಮ್ಮ ಪಕ್ಷದ ಹಲವು ನಾಯಕರು ಬೇರೆ ರೀತಿ ನಡೆದುಕೊಂಡಿದ್ದರು. ಈಗ ಹಳೆಯದನ್ನು ಮರೆತು ಎಲ್ಲರೂ ಒಂದಾಗಿದ್ದೇವೆ, ಎಲ್ಲಾರೂ ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ” ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡರು ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ನಾಯಕರ ಜೊತೆ ಚರ್ಚೆ ಮಾಡಿದ ಬಳಿಕ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟದ್ದ 5 ಆಶ್ವಾಸನೆಗಳಲ್ಲಿ 4 ಆಶ್ವಾಸನೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಚುನಾವಣೆಯಲ್ಲಿ ಕೂಡ ರಾಜ್ಯದ ಜನತೆ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಆದಷ್ಟು ಬೇಗ ಅಕ್ಕಿ ವಿತರಣೆ
ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಹೊಂದಿದ ಕುಟುಂಬಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ನೀಡುವ ಬಗ್ಗೆ ಮಾತನಾಡಿದ ಸಚಿವ ಮುನಿಯಪ್ಪ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳ ಜೊತೆ ಚರ್ಚೆ ಮಾಡಿದ್ದು, ಅಕ್ಕಿ ವಿತರಣೆಗೆ ಪ್ರಯತ್ನ ಮಾಡಲಾಗುತ್ತಿದೆ. ಆದಷ್ಟು ಬೇಗೆ ಫಲಾನುಭವಿಗಳಿಗೆ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಿಸಲಾಗುವುದು ಅಲ್ಲಿಯವರೆಗೂ ಫಲಾನುಭವಿಗಳು ಅಕ್ಕಿಯ ಬದಲಾಗಿ ಹಣವನ್ನು ಸ್ವೀಕರಿಸಲಿದ್ದಾರೆ ಎಂದು ಹೇಳಿದರು.