PLACE YOUR AD HERE AT LOWEST PRICE
2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್ಡಿಎ ಒಕ್ಕೂಟಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ.
ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾದ ನಂತರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.
ಎಕ್ಸ್ (ಟ್ವಿಟರ್) ನಲ್ಲಿ ಜೆಪಿ ನಡ್ಡಾ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜೆಡಿಎಸ್ ನಾಯಕರ ಜೊತೆ ಇರುವ ಫೋಟೊ ಹಂಚಿಕೊಂಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ಸಂತಸ ತಂದಿದೆ.
ನಾವು ಅವರನ್ನು ಹೃದಯಪೂರ್ವಕವಾಗಿ ಎನ್ಡಿಎಗೆ ಸ್ವಾಗತಿಸುತ್ತೇವೆ. ಇದು ಎನ್ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ‘ಹೊಸ ಭಾರತ, ಬಲಿಷ್ಠ ಭಾರತ’ಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಇನ್ನಷ್ಟು ಬಲಪಡಿಸುತ್ತದೆ” ಎಂದು ನಡ್ಡಾ ಬರೆದಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು?
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, “ಬಿಜೆಪಿಯೊಂದಿಗೆ ಕೈಜೋಡಿಸುವ ಬಗ್ಗೆ ಔಪಚಾರಿಕವಾಗಿ ಚರ್ಚೆ ಮಾಡಲಾಗಿದೆ. ಪ್ರಾಥಮಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು, ನಮ್ಮ ಕಡೆಯಿಂದ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ” ಎಂದು ಹೇಳಿದರು.
ಸ್ವಾಗತಿಸಿದ ಬಿಜೆಪಿ ಕರ್ನಾಟಕ
ಜೆಡಿಎಸ್ ಎನ್ಡಿಎ ಒಕ್ಕೂಟ ಸೇರಿಕೊಂಡಿರುವ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ಜೆಡಿಎಸ್ಗೆ ತುಂಬು ಹೃದಯದ ಸ್ವಾಗತ ಕೋರಿದೆ. “ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಮೆಚ್ಚಿ ಎನ್ಡಿಎ ಮೈತ್ರಿಕೂಟದ ಭಾಗವಾಗಲಿರುವ ಜನತಾ ದಳ (ಜಾತ್ಯಾತೀತ) ಪಕ್ಷಕ್ಕೆ ತುಂಬು ಹೃದಯದ ಸ್ವಾಗತ ಮತ್ತು ಅಭಿನಂದನೆಗಳು.
ಇದರಿಂದ ಎನ್ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ಧಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿರವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ. ಎಂದು ಟ್ವೀಟ್ನಲ್ಲಿ ಹೇಳಿದೆ.