PLACE YOUR AD HERE AT LOWEST PRICE
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.
ಏಕಕಾಲದಲ್ಲಿ ಆರ್ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಆತ್ಮಾನಂದ ಕಾಲೋನಿಯ ಫ್ಲಾಟ್ವೊಂದರ ಕೊಠಡಿಯ ಮಂಚದಡಿ ಕಂತೆ ಕಂತೆ ನೋಟುಗಳನ್ನು ಬಚ್ಚಿಡಲಾಗಿತ್ತು. ಕಾರಿನಲ್ಲಿ ಹಣ ಸಾಗಾಟ ಮಾಡುವ ಸುಳಿವು ಪಡೆದ ಐಟಿ ಅಧಿಕಾರಿಗಳು ಗುರುವಾರ ಸಾಯಂಕಾಲ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ದಾಳಿ ನಡೆಸಿದ್ದಾರೆ.
ಈ ವೇಳೆ, ಆತ್ಮಾನಂದ ಕಾಲೋನಿಯ ಫ್ಲಾಟ್ನಲ್ಲಿ ಬರೊಬ್ಬರಿ 23 ಬಾಕ್ಸ್ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.
ಮಂಚದ ಕೆಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಆದರೆ, ಪತ್ತೆಯಾದ ನೋಟಿನ ರಾಶಿಯ ಬಾಕ್ಸ್ಗಳು ಯಾರಿಗೆ ಸೇರಿದ್ದು ಎಂದು ತಿಳಿದುಬಂದಿಲ್ಲ. ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಗಣೇಶ ಬ್ಲಾಕ್ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.