PLACE YOUR AD HERE AT LOWEST PRICE
ಬಂಗಾರಪೇಟೆ:ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ನೀಡದೆ ಕಳಪೆ ಬಿತ್ತನೆ ಆಲೂಗಡ್ಡೆಯನ್ನು ರೈತರಿಗೆ ಮಾರಾಟವನ್ನು ಮಾಡುತ್ತಿದ್ದಾರೆ. ಇದರಿಂದ ಉತ್ತಮ ಫಸಲು ಬರದ ಕಾರಣ ರೈತರು ನಷ್ಟವನ್ನು ಅನುಭವಿಸಿ ಗಿಡಗಳನ್ನು ಕಿತ್ತು ಹಾಕುತ್ತಿದ್ದಾರೆ.
ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳ ಮೇಲೆ ಅಸಮದಾನ ವ್ಯಕ್ತಪಡಿಸಿದರು.
ಗುಣಮಟ್ಟವಿಲ್ಲದ ಬಿತ್ತನೆ ಆಲೂಗಡ್ಡೆಯ ಮಾರಾಟಕ್ಕೆ ಕಡಿವಾಣ ಹಾಕಲು ನೀವು ಏಕೆ ವಿಫಲರಾಗಿದ್ದೀರಿ? ಇಂತಹ ದಂಧೆಯಲ್ಲಿ ತೊಡಗಿರುವ ವರ್ತಕರ ವಿರುದ್ಧ ಈವರೆಗೆ ಏನು ಕ್ರಮ ಕೈಗೊಂಡಿದ್ದೀರಿ? ಎಷ್ಟು ದಾಳಿ ನಡೆಸಿದ್ದೀರಿ? ಎಂದು ಪ್ರಶ್ನೆ ಮಾಡಿದರು.
ಅರಣ್ಯ ಇಲಾಖೆಯವರು ಗಡಿ ಭಾಗದ ಗ್ರಾಮಗಳಲ್ಲಿ ರೈತರಿಗೆ ವಿನಾಕಾರಣ ತೊಂದರೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕ ಆಡಳಿತದಿಂದ ನೀಡಿರುವಂತಹ ಸಾಗುವಳಿ ಚೀಟಿಯನ್ನು ಧಿಕ್ಕರಿಸಿ, ಈ ಜಾಗ ಅರಣ್ಯಕ್ಕೆ ಸಂಬಂಧಿಸಿದ್ದು ಎಂದು ವಿನಾಕಾರಣ ತೊಂದರೆ ನೀಡುತ್ತಿರುವುದು ಸರಿಯಲ್ಲ ಎಂದು ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೈತರು ಉಳಿಮೆ ಮಾಡುವ ಜಾಗ ನಿಮ್ಮದಾಗಿದ್ದರೆ ಮೊದಲು ತಾಲೂಕು ಆಡಳಿತವನ್ನು ಸಂಪರ್ಕಿಸಿ ಜಂಟಿ ಸರ್ವೆ ನಡೆಸಿ,ನಿಮ್ಮದಾದರೆ ನಿಮ್ಮ ಜಾಗವನ್ನು ಉಳಿಸಿಕೊಳ್ಳಿ ಇಲ್ಲವಾದರೆ ರೈತರಿಗೆ ಬಿಟ್ಟುಕೊಡಿ. ಅದನ್ನು ಬಿಟ್ಟು ರೈತರ ಮೇಲೆ ದಬ್ಬಾಳಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.