PLACE YOUR AD HERE AT LOWEST PRICE
ಕೋಲಾರ:ಮೊರಾರ್ಜಿ ದೇಸಾಯಿ ವಸತಿ ಶಾಲೆ ಕರ್ಮಕಾಂಡ ಹಿನ್ನೆಲೆ ಮಾಲೂರಿನ ಯಲವಹಳ್ಳಿ ವಸತಿ ಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಮದ್ಯಾಹ್ನ ಶಾಸಕ ನಂಜೇಗೌಡ ಹಾಗೂ ಸಚಿವ ಬೈರತಿ ಸುರೇಶ್, ಅಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಜೊತೆ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಘಟನೆಯನ್ನು ಖಂಡಿಸಿದರು.
ಈ ಪ್ರಕರಣ ನಾಗರೀಕ ಸಮಾಜ ತಲೆ ತಗ್ಗಿಸುವ ಹೇಯ ಕೃತ್ಯವಾಗಿದೆ. ತಪ್ಪು ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ಅಧಿಕಾರಿಗಳ ಲೋಪಗಳ ಬಗ್ಗೆ ತಿಳಿದು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಯನ್ನು ಶಿಕ್ಷೆಯ ವರ್ಗಾವಣೆ ಮಾಡಲಾಗುವುದು. ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಸರ್ಕಾರಕ್ಕೆ ಸೂಕ್ತ ಸಮಯಕ್ಕೆ ಮಾಹಿತಿ ನೀಡದೆ ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ, ಇವರನ್ನು ರಕ್ಷಣೆ ಮಾಡುವ ಪ್ರಮೇಯವೇ ಬರುವುದಿಲ್ಲ, ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಶಾಸಕ ನಂಜೇಗೌಡ ಮಾತನಾಡಿ, ಸದರಿ ವಿಷಯ ನನ್ನ ಗಮನಕ್ಕೆ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರವೇ ಶಾಲೆಗೆ ಬೇಟಿ ನೀಡಿ ಸಿಬ್ಬಂದಿ ಮತ್ತು ಮಕ್ಕಳ ಜೊತೆ ಮಾತುಕತೆ ನಡೆಸಿದ್ದೇನೆ. ಇಡೀ ಶಾಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದೇನೆ ಮತ್ತು ಈ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದೇನೆ ಎಂದರು.