PLACE YOUR AD HERE AT LOWEST PRICE
ಬಂಗಾರಪೇಟೆ:2023-24ನೇ ಸಾಲಿನ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯದಡಿ ಬಜೆಟ್ ನಲ್ಲಿ ಶೇ 25 ರಷ್ಟು ಅನುದಾನವನ್ನು ಮೀಸಲಿಟ್ಟು ಆರ್ಥಿಕ ಸಬಲೀಕರಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಡಾ.ಬಿ.ಆರ್ ಅಂಬೇಡ್ಕರ್ ರವರು ಫೆಬ್ರವರಿ 23, 1956 ರಲ್ಲಿ ಜಿಲ್ಲೆಯ ಕೆಜಿಎಫ್ ಗೆ ಭೆಟಿ ನೀಡಿದ್ದ ನೆನಪಿಗಾಗಿ ಆ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆ ಮಾಡಿ 10 ಎಕರೆ ಭೂಮಿಯಲ್ಲಿ 25 ಕೋಟಿ ವೆಚ್ಚಮಾಡಿ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಮತ್ತು ಜಿಲ್ಲೆಗಳಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಭವನಗಳನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯಿತಿಗಳು ಜಂಟಿಯಾಗಿ ನಿರ್ವಹಣೆ ಮಾಡಲು ಆದೇಶ ನೀಡಬೇಕು. ಎಲ್ಲಾ ಭವನಗಳನ್ನು ಗ್ರಂಥಾಲಯಗಳನ್ನಾಗಿ ಪರಿವರ್ತಿಸಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಖಾಸಗಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ(ವಿಶ್ವವಿದ್ಯಾಲಯಗಳು) ಈಗಿನ ಮೀಸಲಾತಿ ಪ್ರಮಾಣದಲ್ಲಿ ನೇಮಕಾತಿಗಳನ್ನು ಮಾಡಬೇಕು. ಉನ್ನತ ಶಿಕ್ಷಣಕ್ಕೆ ವಿಧ್ಯಾರ್ಥಿ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪರಿಶಿಷ್ಟ ಜಾತಿ ವರ್ಗಗಳ ಸಮುದಾಯಗಳ ಆದಾಯ ಮಿತಿ ಹೆಚ್ಚಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಬಾಡಿಗೆ ಕಟ್ಟಡಗಳಲ್ಲಿರುವ ವಿಧ್ಯಾರ್ಥಿ ನಿಲಯಗಳನ್ನು ಸ್ವಂತ ಕಟ್ಟಡಗಳಿಗೆ ವರ್ಗಾಯಿಸಬೇಕು. ನಿಲಯಗಳನ್ನು ಉನ್ನತೀಕರಿಸಿ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.