PLACE YOUR AD HERE AT LOWEST PRICE
ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳಾ ವಿರೋಧಿ ಧೋರಣೆಯನ್ನು ಬಿಜೆಪಿಯು ಖಂಡಿಸುತ್ತದೆ ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಮಹಿಳಾ ವಿರೋಧಿ ಧೋರಣೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಪರೀಕ್ಷೆಗಳಲ್ಲಿ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ. ಇಂಥ ಅವಮಾನಕ್ಕೆ ಮಹಿಳೆಯರು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ, ಸಮರ್ಥ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಿಯಾಂಕ ಖರ್ಗೆ ಹಿಂದೆಯೂ ಮಹಿಳೆಯರ ಸರಕಾರಿ ಕೆಲಸ ಪಡೆಯಲು ಮಂಚವೆರಬೇಕು ಎಂದು ಹೇಳಿಕೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಇದೀಗ ಹಿಂದೂ ಧರ್ಮದ, ನಮ್ಮ ಸಂಪ್ರದಾಯವಾದ ಮಾಂಗಲ್ಯ, ಕಾಲುಂಗುರಗಳನ್ನು ತೆಗೆಸುವ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಅಪರಾಧವೆಂದರು.
ಪರೀಕ್ಷೆ ಬರೆಯಲು ಬರುವ ಮಹಿಳೆಯರ ಮಾಂಗಲ್ಯ, ಕಾಲುಂಗುರ ತೆಗೆಸುತ್ತಾರೆ. ಹಿಂದುತ್ವ, ಹಿಂದೂ ಸಂಸ್ಕೃತಿಗೆ ಈ ಸರ್ಕಾರ ಬೆಲೆ ಕೊಡುತ್ತಿಲ್ಲ. ಹಿಂದೂ ಮಹಿಳೆಯರ ಮಾಂಗಲ್ಯ ತೆಗಿಸುವ ದುಸ್ಸಾಹಸದ ಕಾಂಗ್ರೆಸ್ ಮನಸ್ಥಿತಿ ಎಂಥದ್ದು ಎಂಬುದು ಅರ್ಥವಾಗುತ್ತದೆ. ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುವ ಈ ಸರಕಾರವು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುತಿದೆ ಎಂದರು.
ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ, ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ತಿಳಿಸಿದ ಘಟನೆ ಖಂಡನೀಯ. ಇಂತಹ ಪ್ರಕರಣಗಳು ಕಾಂಗ್ರೆಸ್ ಆಡಳಿತದಲ್ಲಿ ಸಾಕಷ್ಟು ನಡೆದಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ದಾವಣಗೆರೆಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಮಹಿಳೆಯರು ಅಡುಗೆ ಮನೆಯಲ್ಲಿ ಇರಲು ಮಾತ್ರ ಲಾಯಕ್ಕು ಎಂಬ ರೀತಿಯಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಮಹಿಳೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ಪ್ರಿಯಾಂಕವಾಧ್ರಾ ಹಾಗೂ ಸೋನಿಯಾ ಗಾಂಧಿಯವರು ಕೆಲಸ ಮಾಡುತ್ತಿದ್ದಾರೆ. ಈಗಿರುವಾಗ ಮತ್ತೊಂದು ಪಕ್ಷದ ಅಭ್ಯರ್ಥಿ ಬಗ್ಗೆ ಅಗೌರವವಾಗಿ ಮಾತನಾಡುವುದು ವಿಷಾದನೀಯ ಮತ್ತು ಖಂಡನೀಯ ಎಂದರು.
ಕಾಂಗ್ರೆಸ್ ಪಕ್ಷದ ಐಟಿ ಸೆಲ್ ನ ಸುಪ್ರಿಯಾ ಶ್ರೀನಾತೆ ಎಂಬುವವರು ಬಿಜೆಪಿ ಪಕ್ಷದ ಅಭ್ಯರ್ಥಿ ಕಂಗನ ರಣಾವತ್ ಕುರಿತು ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿ. ದೇಶಾದ್ಯಂತ ವಿರೋಧ ವ್ಯಕ್ತವಾದಾಗ ಅದನ್ನು ನಾನು ಮಾಡಿಲ್ಲ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಈ ರೀತಿಯ ನಡವಳಿಕೆಗಳು, ಘಟನೆಗಳು ಮಹಿಳೆಯರ ಮೇಲಿನ ಕಾಂಗ್ರೆಸ್ಸಿನ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ ಎಂದರು.
ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಸ್ತ್ರೀಯರನ್ನು ಪ್ರತ್ಯೇಕವಾಗಿ ಗುರುತು ಮಾಡಿಕೊಂಡು ಆರ್ಥಿಕ, ಸಾಮಾಜಿಕವಾಗಿ ಸಶಕ್ತ ಮಾಡಲು ಅನೇಕ ಯೋಜನೆಗಳನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿಗೊಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಮೋದಿಯವರು ಜನ್ ಧನ್, ಸ್ವಚ್ಛ ಭಾರತ್ ಮತ್ತಿತರ ನೂರಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಪರಿಶ್ರಮ ಪಡುತ್ತಿದ್ದಾರೆ. ರಾಜಕೀಯ ಸಶಕ್ತಿಕರಣಕ್ಕಾಗಿ ನಾರಿ ಶಕ್ತಿ ವಂದನ್ ಕಾಯ್ದೆಯನ್ನು ಜಾರಿಗೊಳಿಸಿ ಶೇ.33ರಷ್ಟು ಮೀಸಲಾತಿಯನ್ನು ಕಲ್ಪಿಸಿದ್ದಾರೆ ಎಂದು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂ ಶಕ್ತಿಚಲಪತಿ, ಬಿ.ವಿ.ಮಹೇಶ್, ಮಾಧ್ಯಮ ಸಂಚಾಲಕ ಪ್ರವೀಣ್ ಗೌಡ, ಸಹ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಲೋಕಸಭಾ ಚುನಾವಣಾ ಸಂಚಾಲಕ ಮಾಗೇರಿ ನಾರಾಯಣಸ್ವಾಮಿ, ಮುಖಂಡರಾದ ಚಂದ್ರಶೇಖರ್, ಮಂಜುನಾಥ್, ರಾಜೇಶ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.