• Mon. Sep 16th, 2024

PLACE YOUR AD HERE AT LOWEST PRICE

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ಸ್ವಲ್ಪ ಹೊತ್ತು ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ.

“ಮಧ್ಯಾಹ್ನ ಬಿಸಿಯೂಟ ನಂತರ ಮಕ್ಕಳಿಗೆ ಏಕಾಏಕಿ ವಾಂತಿ, ಹೊಟ್ಟೆನೋವು ಇನ್ನಿತರ ಸಮಸ್ಯೆ ಎದುರಾಗಿದೆ. ಸದ್ಯ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕುಷ್ಟಗಿ ತಾಲೂಕಿನ ಆಸ್ಪತ್ರೆಯಲ್ಲಿ 44 ಮಕ್ಕಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ದೋಟಿಹಾಳ ಗ್ರಾಮದ ಆರೋಗ್ಯ ಕೇಂದ್ರದಲ್ಲಿ 55 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಬಿಜಕಲ್ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದ್ದು, ಕಡಿಮೆ ಸಮಸ್ಯೆ ಇರುವ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಅಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ.

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಒಂದು ತಾಸಿನ ಬಳಿಕ ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ. ನಂತರ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ ಎಂದು ತಿಳಿದುಬಂದಿದೆ.

ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ 500ಕ್ಕಿಂತಲೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಅಲ್ಲೇ ಕೆಲಸ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

You missed

error: Content is protected !!