ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಎನ್ಡಿಎ ಮಿತ್ರಪಕ್ಷವಾದ ಜೆಡಿಎಸ್ ನಾಯಕರು ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆ ಬಗ್ಗೆ ಕಾದು ನೋಡುವ ತಂತ್ರ ಅನುಭವಿಸಿದ್ದರು. ಯೋಗೇಶ್ವರ್ ಇಂದು ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಿಸಿದೆ.
ಉಪ ಚುನಾವಣೆ ಎದುರಿಸುತ್ತಿರುವ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ರಾಜಕೀಯ ಹಾಟ್ಸ್ಪಾಟ್ ಆಗಿದೆ.
ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಇಂದು ಯೋಗೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಚ್ಡಿ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹಲವು ಜೆಡಿಎಸ್ ನಾಯಕರು ಇಂದು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ, ಅಧಿಕೃತವಾಗಿ ನಿಖಿಲ್ ಹೆಸರು ಘೋಷಿಸಿದ್ದಾರೆ. ಆ ಮೂಲಕ ಎನ್ಡಿಎ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ತೆರೆ ಬಿದ್ದಿದೆ.
ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿಯಾಗಲಿ ಎಂದು ಒತ್ತಾಯಿಸಿದ್ದರು. ಇಂದು ಸಹ ಹಲವು ಕಾರ್ಯಕರ್ತರು ನಿಖಿಲ ಪರವಾಗಿ ಫ್ಲೆಕಾರ್ಡ್ ಹಿಡಿದು ಬಂದಿದ್ದರು. ಚನ್ನಪಟ್ಟಣ ಸ್ಥಳೀಯ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಕುಮಾರಸ್ವಾಮಿಯವರು, ನಿಖಿಲ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಯೋಗೇಶ್ವರ್ ಬೆನ್ನಿಗೆ ನಿಂತ ಕಾಂಗ್ರೆಸ್
ಇಂದು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ಸಿಪಿ ಯೋಗೇಶ್ವರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿಸ ಸಂಸದ ಡಿಕೆ ಸುರೇಶ್, ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಭಾಗವಹಿಸಿದ್ದರು. ಭಾರೀ ಜನಸ್ತೋಮದ ನಡುವೆ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.
“ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವನ್ನು ನಾನೂ ನೋಡುತ್ತೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು. ನನ್ನ ಈ ಕೋರಿಕೆಯನ್ನು ತಾವೆಲ್ಲರೂ ಈಡೇರಿಸುತ್ತೀರಿ ಎಂದು ನಂಬಿದ್ದೇನೆ. ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್, ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅಭಿವೃದ್ಧಿಪರವಾಗಿರುವ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಖುಷಿಯಿಂದ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
“ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಬಹುಮತದಿಂದ ಜಯಗಳಿಸೋದು ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ” ಎಂದು ಘೋಷಿಸಿದರು.
ಕೃಪೆ : ಗೌರಿ.ಕಾಂ