PLACE YOUR AD HERE AT LOWEST PRICE
ಕೋಲಾರ: ಬಿಡದಿ ಬಳಿ ಕೇತಗಾನಹಳ್ಳಿಯ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿರ ತೋಟದ ಮನೆಯಲ್ಲಿ ಫೆ.19 ರಂದು ಭಾನುವಾರ ಜೆಡಿಎಸ್ ಗೆ ಸೇರ್ಪಡೆಗೊಂಡು ಜೆಡಿಎಸ್ ಪಕ್ಷದ ಬಾವುಟವನ್ನು ಹಿಡಿಯುತ್ತಿದ್ದೇನೆ ಎಂದು ಕೋಮುಲ್ ನಿರ್ದೇಶಕ ಹಾಗೂ ಜಿಪಂ ಮಾಜಿ ಉಪಾಧ್ಯಕ್ಷ ಡಿ.ವಿ.ಹರೀಶ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆಬ್ರವರಿ 17 ರಂದು ಜೆಡಿಎಸ್ ಪಕ್ಷದ ಸೇರ್ಪಡೆ ಬಗ್ಗೆ ಬಿಡದಿ ಬಳಿಯ ಕೇತಗಾನಹಳ್ಳಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರು ತಮ್ಮ ಬಳಿ ಸುದೀರ್ಘವಾಗಿ ಪಕ್ಷದ ಸೇರ್ಪಡೆ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಶ್ರೀನಿವಾಸಪುರ ತಾಲೂಕುಗಳಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡಿ ಬಲಪಡಿಸಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿರವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ.
ಇತ್ತೀಚಿನ ಬಂಗಾರಪೇಟೆ ಕ್ಷೇತ್ರದ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು, ಕಾಂಗ್ರೆಸ್ ಪಕ್ಷದಿಂದ ದೂರ ಉಳಿಯಲಾಗಿತ್ತು, ಈ ಹಿನ್ನೆಲೆಯಲ್ಲಿ ಅನೇಕ ಬೆಂಬಲಿಗರು, ಅಭಿಮಾನಿಗಳು ಹಾಗೂ ಸಮಾನ ಮಸ್ಕರೊಂದಿಗೆ ಚರ್ಚಿಸಿ ಜೆಡಿಎಸ್ ಸೇರ್ಪಡೆಯ ನಿರ್ಧಾರವನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ಮಾರ್ಚ್ ತಿಂಗಳಲ್ಲಿ ಜೆಡಿಎಸ್ ಪಕ್ಷದಿಂದ ಹುತ್ತೂರು ಹೋಬಳಿಯಲ್ಲಿ ಜೆಡಿಎಸ್ ಪಕ್ಷ ದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾವಿರಾರೂ ಬೆಂಬಲಿಗರೊಂದಿಗೆ ಸೇರ್ಪಡೆ ಕಾರ್ಯಕ್ರಮಕ್ಕೆ ನಿರ್ಧಾರವಾಗಿದೆ ಎಂದಿದ್ದಾರೆ.
ತೆನೆ ಹೊತ್ತ ಮಹಿಳೆ (ಜೆಡಿಎಸ್)ಪಕ್ಷಕ್ಕೆ ಯಾವುದೇ ಷರತ್ತುಗಳು ಇಲ್ಲದೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದೇನೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಲ್ಲಿ ಯಾವುದೇ ಅಭಿವೃದ್ಧಿ ಇಲ್ಲದೆ ಕುಂಠಿವಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ದ ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಲಾಟರಿ ನಿಷೇಧ, ಸಾರಾಯಿ ಮಾರಾಟ ನಿಷೇಧ, ಹಾಗೂ ಶಾಲಾ ಮಕ್ಕಳಿಗೆ ಬೈಸಿಕಲ್ ಸೇರಿದಂತೆ ನಾನಾ ಯೋಜನೆಗಳನ್ನು ಪ್ರತಿಯೊಬ್ಬರು ಸಹ ಮೆಲುಕು ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
2ನೇ ಬಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಸರಕಾರದಲ್ಲಿ ರೈತರ 24 ಸಾವಿರ ಕೋಟಿ ರೂ.ಗಳ ಸಾಲ ಮನ್ನಾ ಮಾಡಿರುವ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಮಹತ್ಕಾಂಕ್ಷಿ ಯೋಜನೆಯಾದ ಪಂಚ ರತ್ನ ಯೋಜನೆ ಹಾಗೂ ರಾಜ್ಯದ ಸುಭಿಕ್ಷೆಗಾಗಿ ದೂರದೃಷ್ಟಿಯ ಚಿಂತನೆಯನ್ನು ಹೊಂದಿರುವ ಅವರ ಜನಪರ ಯೋಜನೆಗಳನ್ನು ಮೆಚ್ಚಿ ಜೆಡಿಎಸ್ ಪಕ್ಷದ ಮೇಲೆ ಒಲವು ಹೆಚ್ಚಿದೆ ಎಂದು ಹೇಳಿದ್ದಾರೆ.