• Thu. May 16th, 2024

ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ಧತೆ: ಜಿಲ್ಲಾಧಿಕಾರಿ ಅಕ್ರಂ ಪಾಷ.

PLACE YOUR AD HERE AT LOWEST PRICE

ಕೋಲಾರ: ‘ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಬುಧವಾರ ವಿಶೇಷ ರೀತಿಯಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಬೆಳಿಗ್ಗೆ 9 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ಮಾಡಿ, ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.

‘ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ, ರಾಷ್ಟ್ರಗೀತೆ, ನಾಡಗೀತೆ, ಕನ್ನಡದ ಹೆಸರಾಂತ ಕವಿಗಳ ಐದು ಗೀತೆ ಹಾಡಿ ನುಡಿನಮನ ಸಲ್ಲಿಸಲಾಗುವುದು. ಬಳಿಕ ವಿವಿಧ ಇಲಾಖೆಗಳ, ಕನ್ನಡಪರ ಸಂಘಟನೆಗಳ ಸ್ತಬ್ಧಚಿತ್ರಗಳ ಮೆರವಣಿಗೆಯು ಗಾಂಧಿವನದ ಬಳಿಯಿಂದ ಆರಂಭವಾಗಿ ಎಂ.ಜಿ ರಸ್ತೆ, ಅಮ್ಮವಾರಿಪೇಟೆ ವೃತ್ತ, ಮೆಕ್ಕೆ ವೃತ್ತ, ಕಾಲೇಜು ವೃತ್ತ, ಚಂಪಕ್ ವೃತ್ತ, ದೊಡ್ಡಪೇಟೆ, ಕ್ಲಾಕ್ ಟವರ್, ಟೇಕಲ್ ವೃತ್ತ, ಡೂಂಲೈಟ್ ವೃತ್ತ ಮಾರ್ಗವಾಗಿ ಸಂಚರಿಸಿ, ಪ್ರವಾಸಿ ಮಂದಿರದ ಬಳಿ ಮುಕ್ತಾಯಗೊಳ್ಳಲಿದೆ. ಸಂಜೆ ಶಾಲಾ ಮಕ್ಕಳಿಂದ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಹೇಳಿದರು.

‘1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯವನ್ನು ಬರೆಯಬೇಕು’ ಎಂದು ನಾಗರಿಕರಲ್ಲಿ ಮನವಿ ಮಾಡಿದರು.

‘1 ರಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಈ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಬೇಕು’ ಎಂದು ಕೋರಿದರು.

 ಆನೆ ಬಳಕೆಗೆ ಅನುಮತಿ

ಕೋಲಾರ ನಗರದಲ್ಲಿ ಬುಧವಾರ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಆನೆ ಬಳಕೆಗೆ ಅರಣ್ಯ ಇಲಾಖೆಯ ಅನುಮತಿ ದೊರೆತಿದೆ. ಎಚ್ಚರಿಕೆಯಿಂದ ಬಳಸಿಕೊಳ್ಳುವಂತೆ ಷರತ್ತು ವಿಧಿಸಿದೆ.

ಗಾಂಧಿವನದಿಂದ ಮೆರವಣಿಗೆ ಆರಂಭವಾಗಲಿದ್ದು, ಆನೆ ಮೇಲೆ ಭುವನೇಶ್ವರಿ ತಾಯಿ (ಕೋಲಾರಮ್ಮ) ಉತ್ಸವ ಮೂರ್ತಿ ಇರಿಸಲಾಗುತ್ತದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ದತ್ತಾತ್ರೇಯ ಅವಧೂತ ಗುರುಪೀಠ ಐರಾಣಿ ಹೊಳೆಮಠ ಮಹಾಸಂಸ್ಥಾನದಿಂದ ‘ರಾಣಿ’ ಹೆಸರಿನ ಆನೆ ಕರೆತರಲಾಗುತ್ತಿದೆ. ಆನೆ ಬಳಕೆಗೆ ಅನುಮತಿ ನೀಡುವಂತೆ ಜಿಲ್ಲಾಡಳಿತ ಹಾಗೂ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್‌ ಮನವಿ ಮಾಡಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!