PLACE YOUR AD HERE AT LOWEST PRICE
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ ಮಾಡಲಾಗಿದೆ.
ಬಾಂಗ್ಲಾದೇಶದ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದಂತೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ಶೇಖ್ ಹಸೀನಾ, ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇದು ಬಾಂಗ್ಲಾದೇಶದ ಆಂತರಿಕ ವಿಷಯ” ಎಂದು ಹೇಳಿದ್ದಾರೆ. ಇನ್ನು 8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯರು ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಅವರೆಲ್ಲವರೂ ಸುರಕ್ಷಿತವಾಗಿದ್ದಾರೆ. 400 ವಿದ್ಯಾರ್ಥಿಗಳು ಸೇರಿದಂತೆ 700 ಭಾರತೀಯ ನಾಗರಿಕರು ದೇಶಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ರೈಲು ಸಂಚಾರ ಸ್ಥಗಿತ
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆ, ಭಾರತೀಯ ರೈಲ್ವೆಯು ಕೋಲ್ಕತ್ತಾ-ಢಾಕಾ ನಡುವಿನ ಮೈತ್ರಿ ಎಕ್ಸ್ಪ್ರೆಸ್ ಮತ್ತು ಕೋಲ್ಕತ್ತಾ- ಖುಲ್ನಾ ನಡುವಿನ ಬಂಧನ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.
ಪ್ರತಿಭಟನೆಗೆ ಕಾರಣವೇನು?
ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ 1971ರಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದ ಯೋಧರ ಕುಟುಂಬಸ್ಥರಿಗೆ ಸರ್ಕಾರಿ ನೇಮಕಾತಿಗಳಲ್ಲಿ ಶೇ. 30 ಮೀಸಲಾತಿಯಿದೆ. ಈ ಮೀಸಲಾತಿ ವ್ಯವಸ್ಥೆ ತಾರತಮ್ಯದಿಂದ ಕೂಡಿದೆ. ಸ್ವಾತಂತ್ರ್ಯ ಚಳುವಳಿಯ ನೇತೃತ್ವ ವಹಿಸಿದ್ದ ಅವಾಮಿ ಲೀಗ್ ಪಕ್ಷದ ಮುಖ್ಯಸ್ಥೆ ಹಾಗೂ ಪ್ರಧಾನಿ ಶೇಖ್ ಹಸೀನಾರ ಬೆಂಬಲಿಗರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೀಸಲಾತಿ ವ್ಯವಸ್ಥೆ ಕೊನೆಗೊಳಿಸಿ ಮೆರಿಟ್ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು ಎಂಬುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.